ದಾವಣಗೆರೆ: ಫುಡ್ ಪಾಯಿಸನ್ ಆಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದ ಪ್ರವಾಸಿ ಮಂದಿರದ ಹಿಂಭಾಗದಲ್ಲಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆದಿದೆ.
ಮಾಯಕೊಂಡದ ಪ್ರವಾಸಿ ಮಂದಿರದ ಹಿಂಭಾಗದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ಅಸ್ವಸ್ಥಗೊಂಡಿದ್ದಳು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇಂದು ಮತ್ತೆ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಈ ಪೈಕಿ ಆರು ವಿದ್ಯಾರ್ಥಿನಿಯರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 14 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಸರ್ಕಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಓದುತ್ತಿದ್ದರು. ಮೊರಾರ್ಜಿ ದೇಸಾಯಿ ವಸತಿಯಲ್ಲಿ ಉಳಿದುಕೊಂಡಿದ್ದಾರೆ. ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು
ಅಸ್ವಸ್ಥರಾದರು. ವಾಂತಿ, ಬೇಧಿ ಕಾಣಿಸಿಕೊಂಡಿತು. ಬಳಿಕ ಅಸ್ವಸ್ಥಗೊಂಡರು. ಆರು ವಿದ್ಯಾರ್ಥಿಗಳು ತೀವ್ರವಾಗಿ ಸುಸ್ತಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳಪೆ ಊಟ ಕಾರಣ...?
ಇನ್ನು ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಳಪೆ ಊಟ ನೀಡುತ್ತಿರುವುದೇ ಕಾರಣ. ಹಾಸ್ಟೆಲ್ ವಾರ್ಡನ್ ಅವರು ಈ ಬಗ್ಗೆ ಯಾವುದೇ ನಿಗಾ ವಹಿಸುತ್ತಿಲ್ಲ. ಗುಣಮಟ್ಟದ ಆಹಾರ ನೀಡಲಾಗುತ್ತಿಲ್ಲ. ಕೊಳೆತ ತರಕಾರಿ ಸೇರಿದಂತೆ ಉತ್ತಮ ಊಟ ನೀಡದ ಕಾರಣ ಆಗಾಗ್ಗೆ ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳುತ್ತಿದ್ದರು. ಆದ್ರೆ, ಇದ್ದಕ್ಕಿದ್ದಂತೆ 20 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಿಯಾಗಿ ಕರ್ತವ್ಯ ನಿರ್ವಹಿಸದ ಹಾಸ್ಟೆಲ್ ವಾರ್ಡನ್ ವಿರುದ್ದ
ಕ್ರಮ ಕೈಗೊಳ್ಳಬೇಕು. ಬೇರೆ ಕಡೆಗೆ ವರ್ಗಾವಣೆ ಮಾಡಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.
ಹಾಸ್ಟೆಲ್ ನಲ್ಲಿನ ಪರಿಸ್ಥಿತಿ ಕುರಿತಂತೆ ತಿಳಿಯಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಹಾಸ್ಟೆಲ್ ನಲ್ಲಿನ ಅವ್ಯವಸ್ಥೆ ಕುರಿತಂತೆ ಮಕ್ಕಳ ಬಳಿ ಕೇಳಿದರೆ ಹೇಳುತ್ತಾರೆ. ಯಾವ ರೀತಿಯ
ಊಟ ಕೊಡಲಾಗುತ್ತಿದೆ ಎಂಬುದು ಗೊತ್ತಾಗುತ್ತದೆ. ಆದ್ದರಿಂದ ಸ್ಥಳಕ್ಕೆ ಬಂದು ಪರಿಶೀಲಿಸಿ, ತಪ್ಪು ಎಸಗಿದ್ದರೆ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಸ್ಥಳೀಯರು
ಒತ್ತಾಯಿಸಿದ್ದಾರೆ.